ಹುಬ್ಬಳ್ಳಿ : ಛೋಟಾ ಮುಂಬಯಿ ಅಂತ ಹೆಸರಿಗೆ ಮಾತ್ರ ಕರೆಯುತ್ತಿದ್ದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳ ಸದ್ದು ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಕಮೀಷನರೇಟ್ ಸಿದ್ಧವಾಗಿದೆ.
ಹೌದು.. ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು 600ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಇನ್ನೂ ಅಪರಾಧ ಪ್ರಕರಣಗಳು, ಮೀಟರ್ ಬಡ್ಡಿ ದಂಧೆ, ವೈಯಕ್ತಿಕ ದ್ವೇಷಕ್ಕಾಗಿ ಹಲ್ಲೆ ಮುಂತಾದವುಗಳನ್ನು ಅತಿ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ ಹಿನ್ನೆಲೆಯಲ್ಲಿ ಎಸಿಪಿಗಳಾದ ವಿನೋದ ಮುಕ್ತೆದಾರ, ಆರ್.ಕೆ.ಪಾಟೀಲ ಹಾಗೂ ಅನುಷಾ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದು, ಪುಡಿ ರೌಡಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
ಉತ್ತರ ವಿಭಾಗದಲ್ಲೇ ಸುಮಾರು 250ಕ್ಕೂ ಅಧಿಕ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಕೆಲವೆಡೆ ಮಾರಕಾಸ್ತ್ರಗಳು, ಲಾಂಗ್ ಪತ್ತೆಯಾಗಿದ್ದು, ಕಮರಿಪೇಟೆ, ಕೇಶ್ವಾಪುರದಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಮುಕ್ತೆದಾರ, ಇನ್ಸಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದಲ್ಲಿ 21 ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ. ಇದಲ್ಲದೆ ನಾಲ್ಕನೇ ದಿನವೂ ಕಾರ್ಯಾಚರಣೆ ಮುಂದುವರೆದಿದ್ದು, ರೌಡಿಶೀಟರ್ ಗಳಿಗೆ ಬಿಸಿಮುಟ್ಟಿಸುತ್ತಿದ್ದಾರೆ.