ಹುಬ್ಬಳ್ಳಿ : ದೆಹಲಿಯ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು.
ನಗರದಲ್ಲಿಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ನಗರ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರುಗಳು ದೇಶಪಾಂಡೆ ನಗರದ ಬಿಜೆಪಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಈ ವೇಳೆ ಬಿಜೆಪಿ ಕಚೇರಿ ಸಮೀಪಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾನಿರತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕದಂತೆ ಮನವೊಲಿಸಲು ಪ್ರಯತ್ನಿಸಿದರು.
ಆದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮಾತಿಗೆ ಸೊಪ್ಪು ಹಾಕದೆ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪ್ರತಿಕೃತಿ ದಹನ ಮಾಡಿದರು. ನಂತರ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಅವರನ್ನು ತಡೆದರು.
ನಮ್ಮ ದೇಶದ ಬಾವುಟದ ವಿರುದ್ಧವಾಗಿ ಯಾರಾದರೂ ಮಾತನಾಡುತ್ತಾರಾ, ಬಿಜೆಪಿಯವರು ಬಾಯಿ ಬಿಟ್ಟರೆ ಬರೀ ಸಂವಿಧಾನ ಬದಲಾವಣೆ, ಬಾವುಟ ಬದಲಾವಣೆ ಎಂದೆಲ್ಲಾ ಹೇಳಿಕೆ ನೀಡುತ್ತಾರೆ. ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಆಕಾಶ್ ಕೊನೆರಿ, ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿ ಮಠ, ಸುನೀಲ ಮರಾಟೆ , ಶಹಜಮಾನ್ ಮುಜಾಹಿದ್, ಆರೀಫ್ ಭದ್ರಾಪುರ, ಇಕ್ಬಾಲ್ ನವಲೂರ, ಸಂತೋಷ ನಾಯಕ ಸೇರಿದಂತೆ ಮುಂತಾದವರು ಇದ್ದರು.