ಹುಬ್ಬಳ್ಳಿ : ಹುಬ್ಬಳ್ಳಿ ವಾರ್ಡ್ ನಂಬರ್ 31 ವ್ಯಾಪ್ತಿಯ ಶಬರಿನಗರದಲ್ಲಿ 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಧಾರವಾಡದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿರ್ಮತಿ ಕೇಂದ್ರದ ವತಿಯಿಂದ 1 ಕೋಟಿ ವೆಚ್ಚದಲ್ಲಿ ಶಬರಿ ನಗರದಿಂದ ಬಿಜಾಪುರ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣ ಕಾಂಕ್ರೀಟ್ ರಸ್ತೆಯನ್ನಾಗಿ ನಿರ್ಮಿಸಲಾಗುವುದು. ಇದರೊಂದಿಗೆ 49 ಲಕ್ಷ ವೆಚ್ಚದಲ್ಲಿ ಒಳಚರಂಡಿಯನ್ನು ಸಹ ನಿರ್ಮಿಸಲಾಗುವುದು. 70 ಲಕ್ಷ ವೆಚ್ಚದಲ್ಲಿ ಶಬರಿನಗರದ ಎಲ್ಲಾ ಒಳ ರಸ್ತೆಗಳನ್ನು ಸಹ ನಿರ್ಮಿಸಲಾಗುವುದು. ಹುಬ್ಬಳ್ಳಿ ಧಾರವಾಡ ನಗರದಲ್ಲಿ ರಸ್ತೆ ಕಾಮಗಾರಿಗಳನ್ನು ಏಕಕಾಲದಲ್ಲಿ ಕೈಗೊಳ್ಳಲಾಗುತ್ತಿದೆ. ಏಳೆಂಟು ತಿಂಗಳಲ್ಲಿ ನಗರದ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ,ಶಂಕರ್ ಸುಂಕದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.