ಹುಬ್ಬಳ್ಳಿ: ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು. ಈ ಮೂಲಕ ದೇಶದ ಜನತೆಗೆ ಅವರವರ ಭಾಷೆಯಲ್ಲಿ ಇತಿಹಾಸ ತಿಳಿಯಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಅದಕ್ಕೆ ನಾನೊಬ್ಬ ಮಂತ್ರಿಯಾಗಿ ಬದ್ದನಾಗಿದ್ದೇನೆ. ಈಗಾಗಲೇ ಸಿಎಂ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ನವರು ಚುನಾವಣೆ ದೃಷ್ಟಿಯಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾವಾಗಲೂ ಅವರದ್ದು ಓಟ್ ಬ್ಯಾಂಕ ರಾಜಕೀಯ. ಪಂಚರಾಜ್ಯ ಚುನಾವಣೆಯಲ್ಲಿ ಇಡೀ ದೇಶದ ಜನರೇ ಅವರಿಗೆ ಪಾಠ ಕಲಿಸಿದ್ದಾರೆ. ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ. ಇನ್ನಾದರೂ ಅವರು ಬುದ್ದಿ ಕಲಿಯಲಿ. ಬಿಜೆಪಿಯವರ ಅಭಿವೃದ್ಧಿ ಕೆಲಸಗಳನ್ನು ಕಾಂಗ್ರೆಸ್ ನವರಿಗೆ ಸಹಿಸಲು ಆಗದೇ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಹಬ್ಬಿಸುವ ಅವಶ್ಯಕತೆ ಇರಲಿಲ್ಲ. ಕೋರ್ಟ್ ನೀಡಿದ ತೀರ್ಪು ವಿರೋಧಿಸಿ ಮುಸ್ಲಿಂ ಸಮೂದಾಯ ಬಂದ್ ಕರೆಕೊಟ್ಟಾಗ ಕಾಂಗ್ರೆಸ್ ಅದಕ್ಕೆ ಬೆಂಬಲಿಸಿದೆ. ಕಾಂಗ್ರೆಸ್ ನಡೆ ಸರಿಯಲ್ಲ ಎಂದು ಕಿಡಿಕಾರಿದರು.